- KANNADA MEGA MEDIA NEWS :: News Coverage From Mangalore and Major Cities of India and world wide - http://kannada.megamedianews.com -

ಕಾರ್ಕಳದಲ್ಲಿ ಮಾದರಿ ಆಡಳಿತ: ಮಟ್ಟಾರು

karkala [1]ಕಾರ್ಕಳ: ಅನೇಕ ವಿಚಾರಗಳಲ್ಲಿ ಕಾರ್ಕಳ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಕಾಲದಲ್ಲಿ ವಿ. ಸುನಿಲ್‌ ಕುಮಾರ್‌ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಆಡಳಿತಾವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕ್ಷೇತ್ರ ಅಭಿಚೃದ್ಧಿಯಾಗಿದೆ. ಮಾದರಿ ಆಡಳಿತದಿಂದಾಗಿ ಪ್ರಸ್ತುತ ಕಾರ್ಕಳ ರಾಜ್ಯದಲ್ಲಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ತಾ.ಪಂ. ಕಚೇರಿ ಸಮೀಪ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್‌ ಕಾರ್ಡ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ, ಕಳೆದ ನಾಲ್ಕೂವರೆ ವರ್ಷದ ಅವಧಿಯಲ್ಲಿ ವಿಪಕ್ಷ ಶಾಸಕನಾಗಿದ್ದರೂ ಅಭಿವೃದ್ಧಿಯಲ್ಲಿ ಕ್ಷೇತ್ರ ಹಿಂದುಳಿಯದಂತೆ ಜವಾಬ್ದಾರಿ ವಹಿಸಿದ್ದೇನೆ. ಹೀಗಾಗಿ ಅಕ್ಕಪಕ್ಕದ ತಾಲೂಕುಗಳಲ್ಲಿ ಆಡಳಿತಾರೂಢ ಪಕ್ಷದ ಶಾಸಕರು ಇದ್ದರೂ ಆ ಕ್ಷೇತ್ರಗಳಿಗಿಂತ ಹೆಚ್ಚಿನ ಅಭಿವೃದ್ಧಿಯಾಗಿದೆ. 2013ರಲ್ಲಿ ಶಾಸಕನಾಗಿ ಜನತೆಗೆ ನೀಡಿದ ಭರವಸೆ ಈಡೇರಿಸಿದ್ದೇನೆ ಎಂದರು.

ಕ್ಷೇತ್ರದಲ್ಲಿ 32 ಸೇತುವೆಗಳು ಹಾಗೂ 57 ಕಿಂಡಿ ಅಣೆಕಟ್ಟುಗಳು 2013ರ ಅನಂತರದ ಅವಧಿಯಲ್ಲಿ ನಿರ್ಮಾಣಗೊಂಡಿವೆ. ಇರುವ ರಸ್ತೆಗಳಿಗೆ ಡಾಮರೀಕರಣವನ್ನಷ್ಟೇ ಮಾಡದೆ ಸಂಚಾರಕ್ಕೆ ಯೋಗ್ಯವಾಗುವ ರೀತಿಯಲ್ಲಿ ಅಗಲಗೊಳಿಸಿ ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದೆ. ಶಾಲೆಗಳಲ್ಲಿ ಅಕ್ಷರ ದಾಸೋಹ, ಆಸ್ಪತ್ರೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಕುಂಬಾರರ ಮಹಾಸಂಘದ ಕಾರ್ಯಾಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್‌ ಮಾತನಾಡಿ, ಕಾರ್ಕಳ ಕ್ಷೇತ್ರದ ಬಗ್ಗೆ ಬಿಜೆಪಿಯ ಹಿರಿಯ ನಾಯಕರು ಚಿಂತಿಸುವ ಪ್ರಮೇಯ ಎದುರಾಗುವುದಿಲ್ಲ. ರಾಜ್ಯದ 224 ಕ್ಷೇತ್ರಕ್ಕೂ ಮಾದರಿ ಎನ್ನುವಂತೆ ಈ ಕ್ಷೇತ್ರ ಅಭಿವೃದ್ಧಿಗೊಂಡಿದೆ ಎಂದರು.

ಬಿಜೆಪಿ ಮುಖಂಡರು, ವಿವಿಧ ಸಂಘಸಂಸ್ಥೆಗಳ ಮುಖಂಡರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕ್ಷೇತ್ರ ಅಧ್ಯಕ್ಷ ಮಣಿರಾಜ್‌ ಶೆಟ್ಟಿ ಪ್ರಸ್ತಾವನೆಗೈದರು. ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್‌ ಮಾತನಾಡಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯ ಕುಮಾರ್‌ ಶೆಟ್ಟಿ, ಉದ್ಯಮಿ ಬೋಳ ಪ್ರಭಾಕರ ಕಾಮತ್‌, ನೆಕ್ಕಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ರತ್ನಾಕರ ಆಚಾರ್ಯ, ಶ್ರೀರಾಮ ಭಟ್‌ ಸಾಣೂರು, ಉದ್ಯಮಿ ಸದಾನಂದ ಶೆಟ್ಟಿ, ರೆಂಜಾಳ ನೋಣಯ್ಯ ಗೌಡ ಉಪಸ್ಥಿತರಿದ್ದರು. ಬಿಜೆಪಿ ವಕ್ತಾರ ನರಸಿಂಹ ಕಾಮತ್‌ ಸ್ವಾಗತಿಸಿ, ಸಂಗೀತಾ ಬೋಳ ಅವರು ಕಾರ್ಯಕ್ರಮ ನಿರ್ವಹಿಸಿದರು.