[1]ಬೆಂಗಳೂರು : ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಅವಕಾಶ ನೀಡದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಹಂಕಾರಿ, ಸರ್ವಾಧಿಕಾರಿ ವರ್ತನೆವುಳ್ಳವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದು, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮಾತನಾಡಲು ಕುಮಾರಸ್ವಾಮಿ ಏಕೆ ಅವಕಾಶ ನೀಡಲಿಲ್ಲ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಮೈತ್ರಿ ಪಕ್ಷಗಳಲ್ಲಿ ವಿಶ್ವಾಸದ ಕೊರತೆಯನ್ನು ಇದು ತೋರಿಸುತ್ತದೆ ಎಂದರು.
ಪರಸ್ಪರ ನಂಬಿಕೆ ಹೊಂದಿಲ್ಲದ ಅಪವಿತ್ರ ಮೈತ್ರಿಯಿಂದ ಜನರು ಏನನ್ನು ನಿರೀಕ್ಷೆ ಮಾಡಲು ಸಾಧ್ಯ, ತನ್ನ ವರ್ತನೆಯಿಂದ ಗಂಭೀರ ರಾಜಕಾರಣಿ ಎಂದೇ ಗುರುತಿಸಿಕೊಳ್ಳುವ ಡಾ. ಜಿ. ಪರಮೇಶ್ವರ್ ಅವರಿಗೆ ರಾಜಕಾರಣಿಯಿಂದಲೇ ಅಪಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ಕುಮಾರಸ್ವಾಮಿ ಮೊದಲ ಸುದ್ದಿಗೋಷ್ಠಿಯಲ್ಲೇ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ಕುರಿತು ಮಾತನಾಡಿರುವುದು ದುರದೃಷ್ಟಕರ ಮತ್ತು, ಅಸಮಂಜಸವಾದದ್ದು, ಇದರಿಂದಾಗಿ ಸ್ವಾಮೀಜಿ ಅನುಸರಿಸುವ ಕೋಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.